ಮೈಸೂರು: ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರದ ಆಯ್ಕೆ ಸಮಿತಿ ತಿರಸ್ಕರಿಸಿರುವ ಕಾರಣ ಕೊಟ್ಯಂತರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ? ಎಂದು ಕೇರಳದ ಕಮ್ಯುನಿಸ್ಟ್ ಸರ್ಕಾರ ಹಾಗೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಅಪಪ್ರಚಾರ ನಡೆಸುತ್ತಿದ್ದಾರೆ. ಈ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಜೋಗಿ ಮಂಜು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ 3 ವರ್ಷಗಳಲ್ಲಿ ಪರೇಡ್ ನಿಯಮ ಪಾಲಿಸದ ಕಾರಣ ಕೇರಳದ ಸ್ತಬ್ಧಚಿತ್ರಗಳಿಗೆ ಗಣರಾಜ್ಯೋತ್ಸವದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜಕೀಯವಾಗಿ ಎದುರಿಸಲಾಗದ ಕೇರಳ ಸರ್ಕಾರ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದೆ ಎಂದವರು ತಿಳಿಸಿದ್ದಾರೆ.
ಈ ಮೊದಲು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಸ್ತಬ್ಧಚಿತ್ರಗಳನ್ನು ಮಾಡಲು ಅವಕಾಶ ಕೊಟ್ಟಿತ್ತು. ಕೋವಿಡ್ ಕಾರಣ 10 ರಾಜ್ಯಕ್ಕೆ ಮಾತ್ರ ಅವಕಾಶ ಇದ್ದು, ಕೇರಳದ ಅವಕಾಶ ತಪ್ಪಿತು. ಇದನ್ನು ತಿರುಚಿ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿದರು.
ಬಿಜೆಪಿಗೆ ನಾರಾಯಣಗುರುಗಳ ಬಗ್ಗೆ ಅಪಾರ ಗೌರವ ಭಾವನೆ ಇದೆ. ನಾರಾಯಣಗುರುಗಳ ಒಂದೇ ಜಾತಿ, ಒಂದೇ ಕುಲ, ಒಬ್ಬನೆ ದೇವರು ಎಂಬ ವಾಕ್ಯವನ್ನು ರಾಷ್ಟ್ರಪತಿಗಳ ಭಾಷಣದಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಸರ್ಕಾರ ನಾರಾಯಣಗುರುಗಳಿಗೆ ಅವಮಾನ ಮಾಡಿಲ್ಲ. ಈ ವಿಷಯವನ್ನು ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

