ನಮ್ಮ ಆರೋಗ್ಯ ನಮ್ಮ ಕೈಯಲ್ಲಿ; ಜೀವ-ಜೀವನ ಎರಡೂ ಮುಖ್ಯ – ಡಾ. ಸುಧಾಕರ್

ಬೆಂಗಳೂರು:ಕೊರೊನ 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂಬುದಾಗಿ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ ಎಂದು ಹೇಳಿದರು.

ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.

ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ.  ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ,  ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸುಧಾಕರ್ ಮನವಿ ಮಾಡಿದರು.

ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಜೊತೆ ನಡೆದ 3 ಗಂಟೆಗಳ ಸುಧೀರ್ಘ ಸಭೆಯಲ್ಲಿ ರಚನಾತ್ಮಕ ಸಲಹೆಗಳನ್ನು ತೆಗೆದುಕೊಂಡು ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ನಿರ್ಧಾರ ಮಾಡಿದೆ.  ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದು ಉತ್ತಮ ಎಂದು ಸಚಿವರು ಸಲಹೆ ಮಾಡಿದರು.

ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು. ಜನರು ಎಚ್ಚರಿಕೆಯಿಂದ ಇದ್ದಷ್ಟು ಕೊರೊನಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಹೇಳಿದರು.