ಬೆಂಗಳೂರು:ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿರುವ ಸಮವಸ್ತ್ರ ಹೊರತುಪಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲಾಗಲಿ, ಇಜಾಬ್ ಆಗಲಿ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದ ಮುಂಭಾಗ ರಾಜ್ಯ ವಿಪತ್ತು ಸ್ಪಂದನಾಪಡೆಯ ನೂತನ ವಾಹನಗಳ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳಲ್ಲಿ ವಿವಾದ ಇರಬಾರದು ಮತೀಯತೆ ಬಿಟ್ಟು ವಿಶಾಲ ಮನೋಭಾವವಿರಬೇಕು ಎಂದು ಹೇಳಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯವೇ ಹೊರತು ಬೇರೇನೂ ಅಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಧರ್ಮ, ಜಾತಿ ಮೀರಿ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಭಾರತ ಮಾತೆಯ ಮಕ್ಕಳು ಎಂಬ ರಾಷ್ಟ್ರಪ್ರೇಮ ಇರಬೇಕು. ಪೂಜೆ, ಧಾರ್ಮಿಕ ಕಾರ್ಯಗಳು ದೇವಾಲಯ, ಮಸೀದಿಗಳಲ್ಲಿರಲಿ. ಶಾಲೆಗಳಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಸಂಸ್ಕಾರ ಇರಬೇಕು ಎಂದು ತಿಳಿಸಿದರು
ಮತೀಯ ಸಂಘಟನೆಗಳ ಬಗ್ಗೆ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಯಾರು ಏಕತೆಗೆ ಅಡ್ಡಗಾಲು ಹಾಕುತ್ತಾರೋ ಅವರನ್ನು ಸರಿಮಾಡುವ ಕೆಲಸ ಆಗುತ್ತದೆ ಎಂದು ಎಚ್ಚರಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿ ವಿಪತ್ತು ಸ್ಪಂದನಾ ಪಡೆಯ ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ರಾಜ್ಯ ವಿಪತ್ತು ಸ್ಪಂದನಾ ಪಡೆಯ ಕೇಂದ್ರೀಯ ತರಬೇತಿ ಅಕಾಡೆಮಿಯನ್ನು ದೊಡ್ಡಬಳ್ಳಾಪುರದಲ್ಲಿರುವ ಅಗ್ನಿಶಾಮಕ ಪಡೆಯ 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು. ಅತಿವೃಷ್ಟಿ, ಅನಾವೃಷ್ಟಿ, ಪ್ರಾಕೃತಿಕ ಹಾಗೂ ಮಾನವ ನಿರ್ಮಿತ ಅವಘಡ ನಿರ್ವಹಿಸಲು ವಿಶೇಷ ಕಾರ್ಯಪಡೆಯ ಅಗತ್ಯವಿದೆ. ಸಿಬ್ಬಂದಿ ಕೊರತೆ ನೀಗಿಸಲು ನಿಯೋಜನೆ ಮೇಲೆ ಸಿಬ್ಬಂದಿ ಒದಗಿಸಲು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

