ಶಾಲಾ ಕಾಲೇಜುಗಳಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧ -ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶಾಂತಿ, ಸುವ್ಯವಸ್ಥೆಗೆ ಭಂಗ ಬಾರದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ  ಮಾತನಾಡಿದ ಅವರು, ವಿಧ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆ ಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೇವಲ ಬೆರೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಹಿಜಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂಬುದು ನನ್ನ ಅನಿಸಿಕೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಎಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

ಕೆಲವು ಮತೀಯ ಸಂಘಟನೆಗಳು, ಮುಗ್ದ ವಿಧ್ಯಾರ್ಥಿಗಳನ್ನು ಮುಂದಿಟ್ಟುಕೊಂಡು,  ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅಂತವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.