ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವುದರಿಂದ ಎಚ್ಚೆತ್ತಿರುವ ಸರ್ಕಾರ ಅಕ್ರಮಗಳಿಗೆ ಕಡಿವಾಣ ಹಾಕಲು ನಿರ್ಧರಿಸಿದೆ.
ಶಿಕ್ಷಕರ ನೇಮಕಾತಿಗಾಗಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆ ಟೆಕ್ನಾಲಜಿ ಬಳಸಿ ಪರೀಕ್ಷಾ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾಗಿದೆ.
ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ವಾಚ್ ಧರಿಸಿ ಪರೀಕ್ಷಾ ಕೊಠಡಿಗೆ ಬರುವಂತಿಲ್ಲ ಎಂಬ ಹೊಸ ರೂಲ್ಸ್ ಮಾಡಲಾಗಿದೆ.
ಅಷ್ಟೇ ಅಲ್ಲ ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಲ್ಲೂ ವಾಲ್ ಕ್ಲಾಕ್ ಹಾಕಲು ತೀರ್ಮಾನಿಸಲಾಗಿದೆ.ಪರೀಕ್ಷಾ ಕೊಠಡಿ ಸುತ್ತಮುತ್ತ ಬ್ಲೂಟೂತ್ ನಿರ್ಬಂಧಿಸಲಾಗಿದೆ.
ಇದೇ 21 ಮತ್ತು 22 ರಂದು 15 ಸಾವಿರ ಶಿಕ್ಷಕರ ನೇಮಕಾತಿ ಉದ್ದೇಶದಿಂದ ರಾಜ್ಯದ್ಯಂತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.
ಪಿಎಸ್ಐ, ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳಲ್ಲಿ ನಡೆದಿರುವ ಹಿನ್ನಲೆಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.
ಈ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಹತ್ವದ ಸಭೆ ನಡೆಸಿ ಯಾವುದೆ ಲೋಪವಾಗದಂತೆ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸುವ ಬಗ್ಗೆ ರೂಪುರೇಷೆ ಸಿದ್ದಪಡಿಸಿದ್ದಾರೆ
ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೆ ಅಕ್ರಮಕ್ಕೆ ಆಸ್ಪದ ನೀಡದಂತೆ ಬಾರಿ ಎಚ್ಚರಿಕೆ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಪರೀಕ್ಷಾ ಕೊಠಡಿಗೆ ತಂತ್ರಜ್ಞಾನ ಉಪಕರಣಗಳು, ವಾಚ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿಷೇಧ ಹೇರಲಾಗಿದೆ.
ಅಕ್ರಮ ತಡೆಗಟ್ಟುವ ಕುರಿತಂತೆ ತಜ್ಞರು ಮತ್ತು ಪೊಲೀಸರು ನೀಡುವ ಸಲಹೆಗಳನ್ನು ಪಾಲನೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

