ಮೈಸೂರು: ಇದೇ ಜೂ.21ರ ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚಿಸಲಾಗುವುದು ಎಂದ ಅವರು ಎಲ್ಲಾ ಪಕ್ಷದ ಶಾಸಕರು, ಸಂಸದರು, ಯೋಗ ತರಗತಿಗಳ ಮುಖ್ಯಸ್ಥರನ್ನು ಸಮಿತಿ ಒಳಗೊಂಡಿರಲಿದೆ ಎಂದರು.
ಯೋಗ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮವಾಗಿಲ್ಲ. ಮೇ 30ಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಲಿದ್ದು ಅವರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಮೊದಲ ಬಾರಿಗೆ ಪ್ರಧಾನಿಗಳು ಆಗಮಿಸುತ್ತಿರುವುದರಿಂದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಚನೆಯಾಗುವ ಸಮಿತಿ
ಕ್ರಮವಹಿಸುತ್ತದೆ ಎಂದರು.
ಈ ಕಾರ್ಯಕ್ರಮ ವಿಶ್ವದಾದ್ಯಂತ ಪ್ರಸಾರವಾಗಲಿದೆ. ಇದರಿಂದ ಸಾಂಸ್ಕೃತಿಕ ನಗರಿಯ ಖ್ಯಾತಿ ವಿಶ್ವಕ್ಕೆ ಪಸರಿಸಲಿದೆ. ಮೈಸೂರಿನ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದರು.
ಬೆಂಗಳೂರು, ಮಂಡ್ಯ ಸೇರಿದಂತೆ ನಾನಾ ಜಿಲ್ಲೆಗಳ ಯೋಗ ತರಗತಿಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕತೆ ತೋರುತ್ತಿದ್ದಾರೆ. ಸ್ಥಳ ಅಂತಿಮವಾದ ಬಳಿಕ ಎಷ್ಟು ಸಂಖ್ಯೆಯಲ್ಲಿ ಯೋಗಪಟುಗಳನ್ನು ಸೇರಿಸಬಹುದು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ರಾಮದಾಸ್, ಮುಡಾ ಅಧ್ಯಕ್ಷ ರಾಜೀವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

