ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ 75ನೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ವತಿಯಿಂದಲೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ ಕಂದಾಯ ಉಪ ವಿಭಾಗಾದಿಕಾರಿಗಳು ಧ್ವಜಾರೋಹಣ ಮಾಡಲಿದ್ದಾರೆ ಈ ಬಗ್ಗೆ ಸಭೆ ನಡೆಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಾಷ್ಟ್ರ ಧ್ವಜಕ್ಕೆ ಎಲ್ಲರೂ ಗೌರವ ಸಲ್ಲಿಸಬೇಕು.ಭಾರತ್ ಮಾತಾಕಿ ಜೈ ಎಂಬ ಘೋಷಣೆ ಬಿಟ್ಟು ಬೇರೆ ಯಾವುದೇ ಧಾರ್ಮಿಕ ಘೋಷಣೆ ಕೂಗುವಂತಿಲ್ಲ ಎಂದು ತಿಳಿಸಿದರು.
ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸೇರಿದಂರೆ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಚರಣೆಗೂ ಅವಕಾಶವಿಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದರು.
ಈ ಮೈದಾನ ಕಂದಾಯ ಇಲಾಖೆಗೆ ಸೇರಿರುವುದರಿಂದ ಇದೇ ಇಲಾಖೆ ವತಿಯಿಂದಲೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ ಎಂದು ಅಶೋಕ್ ತಿಳಿಸಿದರು. ಪ್ರೋಟೋಕಾಲ್ ಪ್ರಕಾರ ಈ ಭಾಗದ ಸಂಸದರು,ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಸಚಿವರು ಹೇಳಿದರು.

