ಸಾಕ್ಷಿ ಮಲ್ಲಿಕ್ ಆಗಮನ: ಕ್ರೀಡಾಪಟುಗಳಿಗೆ ಉತ್ತೇಜನ; -ಸಚಿವ ಎಸ್.ಟಿ.ಎಸ್.

ಮೈಸೂರು: ದಸರಾ ಕ್ರೀಡಾಕೂಟಕ್ಕೆ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರು ಆಗಮಿಸಿರುವುದು ಕ್ರೀಡಾಪಟುಗಳಿಗೆ ಸ್ಪೂರ್ತಿ ಸಿಕ್ಕಂತಾಗಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ್ ನಲ್ಲಿ ಆಯೋಜಿಸಿರುವ ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದರು.

ದಸರಾ ಕುಸ್ತಿ ಪಂದ್ಯಾವಳಿಗೆ ನಾನಾ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸಿದ್ದಾರೆ. ಸಾಕ್ಷಿ ಮಲ್ಲಿಕ್ ಅವರು ಕುಸ್ತಿಪಟ್ಟುಗಳಿಗೆ ಸಲಹೆ, ಸೂಚನೆಗಳನ್ನು ನೀಡಬೇಕು ಎಂದರು.

4600 ಕ್ರೀಡಾ ಸ್ಪರ್ಧಿಗಳು, 800 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 5400 ಕ್ಕೂ ಹೆಚ್ಚು ಜನರು  ಈ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಲ ಕ್ರೀಡಾಪಟುಗಳಿಗೆ ಸಕಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಕ್ರೀಡಾ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಚಿವ ನಾರಾಯಣ ಗೌಡ ಅವರು ಮಾಡುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜು, ಮೈಸೂರು ಮೇಯರ್ ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಎಸ್ಪಿ ಚೇತನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.