ಪ್ರತಿ ದಿನ ಸರ್ಕಾರಿ ನೌಕರರು ಒಂದು ತಾಸು ಹೆಚ್ಚಿಗೆ ಕೆಲಸ ಮಾಡುವಂತೆ ಸಿಎಂ ಸಲಹೆ

ಬೆಂಗಳೂರು: ಪ್ರತಿ ದಿನ ಸರ್ಕಾರಿ ನೌಕರರು ಒಂದು ತಾಸು ಹೆಚ್ಚಿಗೆ ಕೆಲಸ ಮಾಡಬೇಕೆಂದು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ಕರೆ ನೀಡಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದ ಸಂದರ್ಭದಲ್ಲಿ ಸಿಎಂ ಮಾತನಾಡಿದರು

ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ  ಕೆಲಸ ಮಾಡಬೇಕು. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಕೆಳಹಂತದವರೆಗೆ ಈ ಕೆಲಸ ಆಗಬೇಕು. ಮುಂದಿನ ಕೆಲಸಗಳನ್ನು ನನಗೆ ಬಿಡಿ. ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ ಎಂದು ಮನವಿ ಮಾಡಿದರು.

ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್  ಡಾಲರ್ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕದಲ್ಲಿ ವೇತನ ಆಯೋಗ ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲೇ ಎಂದರು.

ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ   ಸಂದರ್ಭಕ್ಕೂ ವ್ಯತ್ಯಾಸ ವಿರುತ್ತದೆ.

ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು. ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರು ಎಂದು ತಿಳಿಸಿದರು

ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ: ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು.

ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ ಎಂದು ಹೇಳಿದರು.

ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ, ಕಂದಾಯ,ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ ಎಂದು ಸಿಎಂ ಶ್ಲಾಘಿಸಿದರು.

ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ  ನಿಯೋಗವು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿತು.