ನವದೆಹಲಿ: ಚೀನಾದ ಮಾದರಿಯಲ್ಲಿ ನಾವು, ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಶಿವಸೇನೆ ಉದ್ಧವ್ಠಾಕ್ರೆ ಬಣದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕನ್ನಡಿಗರನ್ನು ಕೆರಳಿಸಿದ್ದಾರೆ.
ನಮಗೆ ಯಾರ ಅನುಮತಿಯೂ ಬೇಕಿಲ್ಲ ಎಂದು ರಾವತ್ ಅವರು ಉದ್ಧಟತನ ಹೇಳಿಕೆ ನೀಡಿದ್ದಾರೆ.
ಅವರ ಇಂತಹ ಹೇಳಿಕೆ ಕನ್ನಡಿಗರನ್ನು ಕೆರಳಿಸಿರುವುದಲ್ಲದೆ ಎರಡು ರಾಜ್ಯಗಳ ಗಡಿ ವಿವಾದಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೇಳೆ ರಾವತ್, ನಾವು ಚರ್ಚೆಯ ಮೂಲಕ ವಿವಾದವನ್ನು ಬಗೆ ಹರಿಸಿಕೊಳ್ಳಬೇಕು ಎಂದು ಬಯಸುತ್ತೇವೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಬೆಂಕಿ ಹಚ್ಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿಷಯದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅದಕ್ಕಾಗಿ ನಾವು ಚೀನಾ ಭಾರತದ ಗಡಿಯೊಳಗೆ ನುಸುಳಿದಂತೆ ಕರ್ನಾಟಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಿಲ್ಲ ಎಂದು ಕಿಡಿನುಡಿಯಾಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ವೇಳೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮಹಾಮೇಳವಾ ನಡೆಸಲು ಮುಂದಾಗಿತ್ತು. ಜಿಲ್ಲಾಡಳಿತ ಅದಕ್ಕೂ ಅನುಮತಿ ನೀಡಲಿಲ್ಲ.
ಇದೆಲ್ಲದರಿಂದ ಅಸಮಾಧಾನ ಗೊಂಡು ರಾವತ್ ಇಂತಹ ಕೆಟ್ಟ ಹೇಳಿಕೆ ನೀಡಿದ್ದಾರೆ.
ಅವರ ಈ ಹೇಳಿಕೆಗೆ ಕನ್ನಡಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

