ಅಸಮಾಧಾನವೆಂದು ಅರ್ಥೈಸುವುದು ಸರಿಯಲ್ಲ -ಡಾ.ಜಿ.ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಮಾಜಿ ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಕೆಲ ವಿಷಯಗಳ ಬಗ್ಗೆ ಪರಮೇಶ್ವರ್ ಅಸಮಾಧಾನ ಗೊಂಡಿದ್ದಾರೆ ಎಂದೇ ಬಿಂಬಿಸಲಾಗಿತ್ತು.

ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಜಿ.ಪರಮೇಶ್ವರ್ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದ್ದಾರೆ.

ನಾನು 8 ವರ್ಷಗಳ ಕಾಲ ಸುದೀರ್ಘವಾಗಿ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. 2 ಲೋಕಸಭಾ ಚುನಾವಣೆ ನಿರ್ವಹಿಸಿದ್ದೇನೆ. ಅನುಭವಗಳ ಆಧಾರಾದ ಮೇಲೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಕೆಲ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅದನ್ನು ಅಸಮಾಧಾನ ಅಂತ ಅರ್ಥೈಸುವುದು ಸರಿಯಲ್ಲ, ನನ್ನ ಅಭಿಪ್ರಾಯಗಳನ್ನು ಸುರ್ಜೇವಾಲಾ ಅವರ ಬಳಿ ಹೇಳಿದ್ದೇನೆ ಎಂದು ತಿಳಿಸಿದರು.

ತಮಗೆ  ತಿಳಿಸದೆ ಪ್ರಣಾಳಿಕೆಗಳನ್ನು ಘೋಷಣೆ ಮಾಡುತ್ತಿರುವ ಕುರಿತು ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.