ಮೋದಿ ಬ್ರಹ್ಮಾಸ್ತ್ರ ಕರ್ನಾಟಕದಲ್ಲಿ ಕೆಲಸ ಮಾಡಲ್ಲ -ಎಚ್ ಡಿ ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬ್ರಹ್ಮಾಸ್ತ್ರಗಳು ಕರ್ನಾಟಕದಲ್ಲಿ ಕೆಲಸ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

ಮೋದಿ ಅವರು ಎಷ್ಟು ಸಲ ರಾಜ್ಯಕ್ಕೆ ಬಂದರೂ ಪ್ರಯೋಜನ ಇಲ್ಲ,ಬಿಜೆಪಿ ಆಡಳಿತ ಎಂತದ್ದು ಎಂಬುದನ್ನು ರಾಜ್ಯದ ಜನತೆ ನೋಡಿ ಆಗಿದೆ ಅವರಿಗೆ‌ ಎಲ್ಲವೂ ಗೊತ್ತಿದೆ ಎಂದು ಟೀಕಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದೇವನಹಳ್ಳಿ ರೋಡ್ ಶೋ ಮಳೆಯ ನೆಪದಿಂದ ರದ್ದಾಗಿದೆ, ಅಸಲಿ ವಿಷಯ ಅದಲ್ಲ, ಜನರೇ ರೋಡ್ ಶೋಗೆ ಬಂದಿಲ್ಲ.

ಇವರು ಜನರಿಗೆ ಹಣ ಕೊಡಲು ಹೋದರೆ, ನೀವೇನು ನಮಗೆ ಹಣ ಕೊಡೋದು, ನಾವೇ ಕೊಡುತ್ತೇವೆ ತೆಗೆದುಕೊಳ್ಳಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕೆ ಗೃಹ ಸಚಿವರ ರೋಡ್ ಶೋ ರದ್ದಾಗಿದೆ ಎಂದು ‌ಎಚ್ ಡಿ ಕೆ‌ ಟೀಕಾಪ್ರಹಾರ ನಡೆಸಿದರು.

ಬಿಜೆಪಿ ನಾಯಕರು ಮೋದಿ ಅವರ ಮುಖ ನೋಡಿ ಮತ ಹಾಕಿ ಎಂದು ಕೇಳುತ್ತಿದ್ದಾರೆ. ಹಾಗಾದರೆ ಇವರು ಮಾಡಿದ ಸಾಧನೆ ಶೂನ್ಯವೆ, ನಮ್ಮ ಮುಖ ನೋಡಿ ಮತ ಹಾಕಿ ಎಂದು ರಾಜ್ಯದ ಬಿಜೆಪಿ ನಾಯಕರು ಯಾಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಪಂಚರತ್ನ ಯೋಜನೆಗಳು, ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಕನಸುಗಳನ್ನು ನನಸು ಮಾಡುತ್ತೇವೆ. ಹೀಗಾಗಿ ಜೆಡಿಎಸ್ ಪರವಾಗಿ ಮತ ಪರಿವರ್ತನೆ ಆಗಲ್ಲ ಎನ್ನುವುದಕ್ಕೆ ಉತ್ತರ ಸಿಗಲಿದೆ,ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ‌ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರದಿಂದ ಮೇ 8ರ ಸಂಜೆವರೆಗೆ ನಿರಂತರವಾಗಿ ಪ್ರವಾಸ ಮಾಡುತ್ತೇನೆ. ದಿನಕ್ಕೆ 8 ರಿಂದ 10 ಕ್ಷೇತ್ರಗಳಿಗೆ ಹೋಗುತ್ತೇನೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ  ಇಬ್ರಾಹಿಂ ಅವರೂ ಪ್ರಚಾರಕ್ಕೆ ಹೋಗುತ್ತಾರೆ ಎಂದು ಎಚ್ ಡಿ ಕೆ ತಿಳಿಸಿದರು.

ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನ ಕುಮಾರ್ ಅವರ ಜತೆಗೆ ಶಿವಮೊಗ್ಗದ ಕಾಂಗ್ರೆಸ್ ನಾಯಕರಾದ ಬೊಮ್ಮಘಟ್ಟ ಮಂಜುನಾಥ್, ರಘು ಹಾಗೂ ಮುಖಂಡರಾದ ಸುನೀಲ ಗೌಡ, ಸುನಿಲ್, ಪ್ರಸನ್ನ ಮುಂತಾದವರು ಜೆಡಿಎಸ್ ಪಕ್ಷ ಸೇರಿದರು.

ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಶ್ರೀಕಾಂತ್ ಹಾಗೂ ಬೆಂಗಳೂರು ನಗರ ಘಟಕದ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.