ಬೆಂಗಳೂರು: ರಾಜ್ಯದ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ ಎಂದು ಸಂಸದ ಡಿ.ವಿ ಸದಾನಂದಗೌಡ ಬೇಸರ ವ್ಯಕ್ತಪಡಿಸಿದರು.
ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದ 13 ಮಂದಿ ಬಿಜೆಪಿ ಸಂಸದರು ಯಾವುದೇ ಕೆಲಸ ಮಾಡಿಲ್ಲ, ಅಯೋಗ್ಯರು ಎಂದು ಮಾನಹಾನಿ ಆಗುವ ರೀತಿ ವರದಿಗಳು ಬರುತ್ತಿದ್ದರೂ ರಾಜ್ಯ ಬಿಜೆಪಿ ನಾಯಕರು ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದರು.
13 ಮಂದಿ ಬಿಜೆಪಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದು ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ ಎಂದು ಹೇಳಿದರು.
ಈಗ ಆಗಿರುವ ಗೊಂದಲವನ್ನು ಕೂಡಲೇ ಪರಿಹರಿಸುವ ಕೆಲಸವನ್ನು ಸಂಬಂಧಪಟ್ಟ ನಾಯಕರು ಮಾಡಬೇಕು ಎಂದು ಆಗ್ರಹಿಸಿದರು.
ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದೆ. ಈ ಸಂದರ್ಭದಲ್ಲಿ ಸಂಸದರನ್ನು ತೇಜೋವಧೆ ಮಾಡುವ ಕೆಲಸವಾಗುತ್ತಿದೆ.
ಮಾನಹಾನಿ ಹಿಂದೆ ಯಾರಿದ್ದಾರೋ ಗೊತ್ತಿಲ್ಲ. ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಮಂದಿ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಮಾಡಿಲ್ಲ. ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ರೀತಿಯಲ್ಲಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ ಎಂದರು.
ಅಲ್ಲದೆ, ಮತದಾರರಿಂದ ಆಯ್ಕೆಗೊಂಡ ಸಂಸದರನ್ನು ತೇಜೋವಧೆ ಮಾಡುವ ಕೆಲಸ ಎಷ್ಟು ಸರಿ ಈ ಬಗ್ಗೆ ನನಗೆ 12 ಮಂದಿ ಸಂಸದರು ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಿದರು.
ಪಕ್ಷದ ಹಿರಿಯರ ಸೂಚನೆಯಂತೆ ಈ ಷಡ್ಯಂತ್ರ ನಡೆಯುತ್ತಿದೆಯೇ ಎಂದೂ ಅವರು ಖಾರವಾಗಿ ಪ್ರಶ್ನಿಸಿದರು.
ವಿಧಾನಸಭಾ ಚುನಾವಣೆಯ ಸೋಲಿನ ಸಂದರ್ಭದಲ್ಲಿ ಪಕ್ಷದ ನಾಯಕರು ಹಾಗೂ ಜನಪ್ರತಿನಿಧಿಗಳ ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸದಾನಂದಗೌಡ ಬೇಸರ ವ್ಯಕ್ತಪಡಿಸಿದರು.

