ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ, ಹೊಟ್ಟೆ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ತಡವಾಗಿಯಾದರೂ ಸರಿ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿಂದ ಇದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.
ಅವರ ಖುಷಿ ನೋಡಲಾಗದೇ, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಹೋರಾಟ ಮಾಡುತ್ತೇನೆ ಎಂದು ಕೆಲವರು ಹೇಳುತ್ತಿದ್ದಾರೆ ,ಮಾಡಲಿ ಎಂದರು.
ಬಿ.ಎಸ್.ಯಡಿಯೂರಪ್ಪನವರು ಧರಣಿ ಮಾಡುವುದಾಗಿ ಹೇಳಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ,ಹಾಗಾಗಿ ಯಡಿಯೂರಪ್ಪನವರು ಮಾಡಲಿ ಎಂದು ಹೇಳಿದರು.
ಈಗಲೂ ಅವರು ವಿಧಾನಸಭೆಗೆ ಬಂದು ಹೋರಾಟ ಮಾಡಲಿ ಎಂದು ಕರೆ ನೀಡಿದರು ಡಿಕೆಶಿ.
ಅನ್ನಭಾಗ್ಯ ಯೋಜನೆ ಜಾರಿ ವಿಚಾರಪವಾಗಿ ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಮಾತನಾಡಲಿದ್ದಾರೆ.
ಮುಖ್ಯಮಂತ್ರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರ ಜತೆ ಮಾತನಾಡುವ ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿದ್ಯುತ್ ಬೆಲೆ ಏರಿಕೆ ವಿರುದ್ಧ ಉದ್ಯಮಿಗಳು ಹೋರಾಟ ಮಾಡುತ್ತಿದ್ದಾರಲ್ಲಾ ಎಂದು ಕೇಳಿದಾಗ, ‘ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ,ಬಿಜೆಪಿ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದೆ ಎಂದು ಉತ್ತರಿಸಿದರು.
ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದು ಹೇಳಿದರು.
ಬಿಜೆಪಿಯವರು ಎಷ್ಟು ಹೊಸ ಬಿಲ್ ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್ ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ.
ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು ಎಂದು ಡಿಕೆಶಿ ಪ್ರಶ್ನಿಸಿದರು.
ಕುಮಾರಣ್ಣ ಅವರು ಮಾತನಾಡಲಿ, ನಾನು ಅವರ ಸಲಹೆ ಪಡೆಯುತ್ತೇನೆ. ವಿದ್ಯುತ್ ನಿಗಮದವರು ಜನವರಿಯಿಂದ ದರ ಏರಿಕೆ ಜಾರಿಗೆ ಮುಂದಾಗಿದ್ದು, ಇದರಿಂದ ವಿದ್ಯುತ್ ಬಿಲ್ ಹೆಚ್ಚಾಗಿ ಬಂದಿದೆ.
ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರು, ನಾವು ಕೂತು ಚರ್ಚೆ ಮಾಡಿ ತೀರ್ಮಾನ ಮಾಡಿ ಪರಿಹಾರ ನೀಡುತ್ತೇವೆ. ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಆರಂಭವಾಗಿಲ್ಲ ಎಂಬ ಪ್ರಶ್ನೆಗೆ, ‘ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು.
ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು.
ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ ಎಂದು ಡಿಸಿಎಂ ಎಚ್ಚರಿಸಿದರಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು.

