ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಸಮಾಜದ ಬಗ್ಗೆ ದೂರದೃಷ್ಟಿ ಇತ್ತು: ಸಿದ್ದರಾಮಯ್ಯ

ಮೈಸೂರು: ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಸಮಾಜದ ಬಗ್ಗೆ ದೂರದೃಷ್ಟಿ ಇತ್ತು. ಈ ಕಾರಣಕ್ಕೇ ಶಿಕ್ಷಣ ಮತ್ತು ಅಧ್ಯಾತ್ಮಿಕ ಸಂಸ್ಕಾರದಲ್ಲಿ ಸುತ್ತೂರು ಮಠ ಹೆಮ್ಮರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌

ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ಜಗದ್ಗುರು ಡಾ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಬಡವರು ಮತ್ತು ಅಶಕ್ತರಿಗೆ ಶಿಕ್ಷಣ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳನ್ನು ಮುಖ್ಯವಾಹಿನಿಗೆ ತಂದು ಬೆಳೆಸಿದೆ ಶ್ರೀಮಠ.

ಚಾತುವರ್ಣದ ಕಾರಣದಿಂದ ಸಮಾಜದಲ್ಲಿ ಬೇರೂರಿದ್ದ ಅಸಮಾನತೆಯನ್ನು ಸುತ್ತೂರು ಮಠ ಅನ್ನ ಮತ್ತು ಶಿಕ್ಷಣ ದಾಸೋಹದ ಮೂಲಕ ಅಳಿಸುತ್ತಿದೆ ಎಂದು ಸಿಎಯ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣದ ಮೂಲಕ ಮಕ್ಕಳನ್ನು ಉತ್ತಮ ಮನುಷ್ಯರನ್ನಾಗಿಸುವ, ಉತ್ತಮ ಪ್ರಜೆಯನ್ನಾಗಿಸುವ ಮಹಾನ್ ಕಾರ್ಯವನ್ನು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ತಪಸ್ಸಿನಂತೆ ಮಾಡಿದರು ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಕೂಡ ನೂರಕ್ಕೆ 78 ಮಂದಿಗೆ ಮಾತ್ರ ಅಕ್ಷರ ಕಲಿಕೆ ಸಾಧ್ಯವಾಗಿದೆ. ಉಳಿದವರಿಗೆ ಇನ್ನೂ ಸಿಕ್ಕಿಲ್ಲ. ವೈಜ್ಞಾನಿಕ-ವೈಚಾರಿಕ ಶಿಕ್ಷಣ ಸಿಗದೇ ಹೋದರೆ ಸಮಾಜಕ್ಕೆ ಜಡತ್ವ ಬಡಿಯುತ್ತದೆ. ಕುವೆಂಪು ಅವರ ಆಶಯದ ವಿಶ್ವ ಮಾನವ ಪ್ರಜ್ಞೆ ವಿಸ್ತರಿಸಿದಾಗ ಮಾತ್ರ ಸಮಾಜಕ್ಕೆ ಚಲನಶೀಲತೆ ಬರುತ್ತದೆ ಎಂದು ಸಿಎಂ ತಿಳಿಸಿದರು.

ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರದು ಬಹಳ ದೊಡ್ಡ ಸಾರ್ಥಕ ಬದುಕು. ಅಧ್ಯಾತ್ಮಿಕವಾಗಿ, ಶೈಕ್ಷಣಿಕವಾಗಿ, ಆರೋಗ್ಯಕರವಾಗಿ ಸಮಾಜವನ್ನು ತಿದ್ದಿದ, ಮುನ್ನಡೆಸಿದ ಸಾರ್ಥಕ ಬದುಕು ಅವರದ್ದಾಗಿದೆ.

12 ನೇ ಶತಮಾನದಲ್ಲೇ ಬಸವಾದಿ ಶರಣರು “ಇವ ನಮ್ಮವ” ಎನ್ನುವ ಮಂತ್ರದ ಮೂಲಕ ಸಮಾಜದ ಅಸಮಾನತೆಗೆ ಮದ್ದು ಕೊಟ್ಟರು. ಸಂವಿಧಾನದ ಪ್ರಕಾರ ಸಹಿಷ್ಣುತೆ, ಸಹಬಾಳ್ವೆ ಆಚರಣೆಗೆ ಬರಬೇಕಿದ್ದರೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ನೀಡುವ ಇಚ್ಚಾಶಕ್ತಿ ಬೇಕು. ಆ ಇಚ್ಚಾಶಕ್ತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಇತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಸವಾದಿ ಶರಣರ ಆಶಯದಂತೆ ಅಶಕ್ತರಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಜನರಿಗೆ ಒಪ್ಪಿಸಿದ್ದೇವೆ ಎಂದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ ಅವರ ಸಾಮಾಜಿಕ ನ್ಯಾಯದ ಆಶಯಗಳು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕಾಯಕದಲ್ಲಿವೆ. ಈ ಎಲ್ಲರ ಕಾಯಕ ಶ್ರೇಷ್ಠ ಪ್ರಜ್ಞೆಯಿಂದ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ನುಡಿದರು.

ನಾನು ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿ ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದೆವು. ತಾಯಿ ನಮಗೆ ಕೊಟ್ಟ ಶಕ್ತಿಯನ್ನು ಗೃಹಲಕ್ಷ್ಮಿ ಕಾರ್ಯಕ್ರಮದ ಮೂಲಕ ಜನರಿಗೆ ನೀಡುತ್ತಿದ್ದೇವೆ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಹೇಳಿದರು

ಸುತ್ತೂರು ಕ್ಷೇತ್ರ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾಸಂಸ್ಥಾಮ ಮಠದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಸಿದ್ಧಗಂಗಾ ಕ್ಷೇತ್ರದ ಶ್ರೀ ಸಿದ್ಧಗಂಗಾ ಮಹಾಸ್ವಾಮಿಗಳು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ವಹಿಸಿದ್ದರು.

ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡರು, ರವಿವಿಶಂಕರ್, ಗಣೇಶ್ ಪ್ರಸಾದ್, ಶ್ರೀವತ್ಸ, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಚ್.ವಿಶ್ವನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.