ಬರ ಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ಈ ಅನುದಾನ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ಹೇಳಿದರು.

ನವದೆಹಲಿಯಿಂದ ಪಕ್ಷದ ವರಿಷ್ಠರಾದ  ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು ಎಂದು ಇದೇ‌ ವೇಳೆ ಸಿದ್ದರಾಮಯ್ಯ ತಿಳಿಸಿದರು.