ಬೆಂಗಳೂರು: ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರು ಅಖಿಲ ಕರ್ನಾಟಕ ಗಾಣಿಗರ ಸಂಘದ ವತಿಯಿಂದ ಬೆಂಗಳೂರಿನ ಅಲಹಳ್ಳಿ ಅಂಜನಾಪುರದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶ , ನೂತನ ಕಟ್ಟಡ ಬ್ಲಾಕ್-1 ಉದ್ಘಾಟನೆ ಹಾಗೂ ಬ್ಲಾಕ್ -2 ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮ ನೆರೆವೇರಿಸಿ ಸಿಎಂ ಮಾತನಾಡಿದರು.
ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತ,ಶತಮಾನಗಳಿಂದ ಅಕ್ಷರ ಸಂಸ್ಕೃತಿ ಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ,ನಿಮ್ಮೊಂದಿಗೂ ಇರುತ್ತೇವೆ ಎಂದು ಹೇಳಿದರು.
ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು, ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಇದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ ಎಂದು ವಿಷಾದಿಸಿದರು.
ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ ಏನೊ ಗೊತ್ತಿಲ್ಲ. ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ ನಾವು ಸ್ವೀಕಾರ ಮಾಡಿಲ್ಲ, ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಾಣಿಗರಿಗೆ ಹೆಚ್ಚಿನ ಸಹಾಯ ಮಾಡುವುದಾಗಿ ಭರವಸೆ ನೀಡಿದರು ನಿಮಗೆ ನ್ಯಾಯ ಕೊಡಿಸಲು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಸಿಎಂ ಭರವಸೆ ನೀಡಿದರು.
ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀ ಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಧಾಕೃಷ್ಣ ಎಂಬುವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಮುಂದೆಯೂ ಅದನ್ನು ನಾವು ಮುಂದುವರೆಸುತ್ತೇವೆ ಎಂದು ಸಿಎಂ ತಿಳಿಸಿದರು.
ವಿ.ಆರ್.ಸುದರ್ಶನ್ ಮತ್ತು ನಾವು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ ಎಂದು ಹೇಳಿದರು.
ರೂಢಾನಂದಪುರಿ ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಿಗೆ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಲಿ ಎಂದು ಹಾರೈಸಿದರು
ಗಾಣಿಗ ಸಂಘದ ಅಧ್ಯಕ್ಷ ಎಂ.ಆರ್.ರಾಜಶೇಖರ್, ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ್, ಶಾರದಾ ಮೋ ಹನ್ ಶೆಟ್ಟಿ, ಡಾ: ವಾಸಂತಿ, ಮೈಸೂರಿನ ಮಾಜಿ ಮೇಯರ್ ಅನಂತ್, ರಮೇಶ್, ಎಂ.ಎಸ್.ಶ್ರೀ ನಿವಾಸಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

