ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಫಲ ನೀಡಿಲ್ಲ: ಆರ್.ಅಶೋಕ್

ಬೆಂಗಳೂರು: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿಗೆ ಸಂತಸ ತಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ‌ಮೋದಿ ಪ್ರಭಾವ ಎದ್ದು ಕಾಣುತ್ತಿದೆ ಎಂದು ಆರ್.ಅಶೋಕ್ ಹೇಳಿದರು.

ಛತ್ತೀಸ್ ಘಡದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ತೆಲಂಗಾಣದಲ್ಲಿ 11 ಸ್ಥಾನ ಗಳಿಸಿದೆ. ಎಲ್ಲಾ ಕಡೆಗಳಲ್ಲಿ ಬಿಜೆಪಿ ತನ್ನ ಅಸ್ತಿತ್ವ ಸಾಧಿಸಿಕೊಂಡಿದೆ. ಕಾಂಗ್ರೆಸ್ ಎಲ್ಲಾ ಕಡೆ ಖಾಲಿ ಆಗುತ್ತಿದೆ,ಆದರೆ ತೆಲಂಗಾಣದಲ್ಲಿ ರೆಸಾರ್ಟ್ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಎಲ್ಲ ಕಡೆ ಟುಸ್ ಪಟಾಕಿ ಎಂದು ಗೇಲಿ ಮಾಡಿದರು.

ಮಧ್ಯಪ್ರದೇಶ, ರಾಜಸ್ತಾನದಲ್ಲಿ ಗ್ಯಾರಂಟಿ ಕೊಟ್ಟರೂ ಪ್ರಯೋಜನವಾಗಿಲ್ಲ, ತೆಲಂಗಾಣದಲ್ಲಿ ಕೆಸಿಆರ್ ಕುಟುಂಬ ರಾಜಕಾರಣ ಮತ್ತು ಮನೆಯಿಂದಲೇ ಸರ್ಕಾರ ನಡೆಸಿದ್ದು ಅವರಿಗೆ ಹಿನ್ನಡೆಯಾಗಿದೆ ಎಂದು ಅಶೋಕ್ ತಿಳಿಸಿದರು.