ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ನೋಟಿಸ್ ಮಾಡಿದೆ.
ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ್ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಇದೆ.
ಕಾರ್ಖಾನೆಯಲ್ಲಿ ಎಥೆನಾಲ್ ಉತ್ಪಾದಿಸುವ ಘಟಕವೂ ಇದೆ. ಕಾರ್ಖಾನೆಯು ಕೊಳಚೆ ನೀರನ್ನು ನೇರವಾಗಿ ಮುಲ್ಲಾಮಾರಿ ಜಲಾಶಯಕ್ಕೆ ಹರಿಸುತ್ತಿದೆ ಎಂದು ಆರೋಪಿಸಲಾಗಿತ್ತು.
ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಾರ್ಖಾನೆಯ ಅವೈಜ್ಞಾನಿಕ ನಿರ್ವಹಣೆ ಹಾಗೂ ಹಲವಾರು ಲೋಪಗಳು ಕಂಡುಬಂದಿದ್ದವು.
ಹೀಗಾಗಿ, ಕಾರ್ಖಾನೆಯನ್ನು ಮುಚ್ಚಲು ಮಂಡಳಿ ಆದೇಶಿಸಿದೆ, ಕಾರ್ಖಾನೆಗೆ ಒದಗಿಸುತ್ತಿದ್ದ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಬೇಕು ಎಂದು ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಅಲ್ಲದೆ, ಇತ್ತೀಚೆಗೆ, ಹುಮ್ನಾಬಾದ್ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಆ ಕಾರ್ಖಾನೆಯನ್ನೂ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.
ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ನಡೆದ ಕೆಎಸ್ಪಿಸಿಬಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಕಾರ್ಖಾನೆಯನ್ನು ಮುಚ್ಚುವಂತೆ ನೋಟಿಸ್ ಕಳುಹಿಸಲಾಗಿದೆ.
ರಾಜ್ಯದಲ್ಲಿ ನಿಯಮ ಉಲ್ಲಂಘಿಸುತ್ತಿರುವ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿತ್ತು.

