ಮೈಸೂರು: ನಮ್ಮ ಗ್ಯಾರೆಂಟಿ ಯೋಜನೆಯನ್ನು ಪ್ರಧಾನಿ ಮೋದಿ ಹೈಜಾಕ್ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ನಗರದ ಸರ್ಕಾರಿ ಅತಿಥಿಗೃಹದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೋದಿಯವರು ನೀಡಿದ ಯಾವೊಂದು ಭರವಸೆಗಳು ಈಡೇರಿಲ್ಲ, ಅವರು ಕೊಟ್ಟಿರುವುದು ಸುಳ್ಳು ಗ್ಯಾರಂಟಿ ನಮ್ಮದು ನಿಜವಾದ ಗ್ಯಾರಂಟಿ ಎಂದು ಸಮರ್ಥಿಸಿಕೊಂಡರು.
ಮುಂದಿನ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಡಿ.
ಕೆ ಸುರೇಶ್ ಅವರೂ ಸೇರಿದಂತೆ ಯಾರಾದರೂ ದೇಶ ವಿಭಜನೆ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಹೇಳಿದರು
ದೇಶ ಉರುಳಿಸುವಂತಹ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ ಆ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶವನ್ನು ಒಡೆಯುವಂತಹ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದರು.
ನಿಜವಾಗಲೂ ಭಾರತ ದೇಶವನ್ನು ಕಟ್ಟಿದವರು ನಾವು ಬಿಜೆಪಿಯವರು ಅಲ್ಲ ಎಂದು ಸಚಿವರು ಹೇಳಿದರು.
ದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತವಿಲ್ಲದ ರಾಜ್ಯಗಳಲ್ಲಿ ಕೇಂದ್ರವು ಇಡಿ ಮತ್ತು ಸಿಬಿಐ ನಂತಹ ಸಂಸ್ಥೆಗಳನ್ನು ಬಳಸಿಕೊಂಡು ಆ ಸರ್ಕಾರಗಳನ್ನು ಉರುಳಿಸುವಂತಹ ಕೆಲಸವನ್ನು ಮಾಡುತ್ತಿದೆ ಎಂದು ಸಚಿವ ಗುಂಡೂರಾವ್ ಗಂಭೀರ ಆರೋಪ ಮಾಡಿದರು.

