ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ವಿದ್ಯುಕ್ತ್ ಚಾಲನೆ ನೀಡಿದರು.
ಸಿದ್ದರಾಮಯ್ಯ ಅವರನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನಿತರ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ,
ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳಕರ, ಎಂ.ಬಿ.ಪಾಟೀಲ, ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತಿತರ ಹಾಲಿ,ಮಾಜಿ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.
ಈ ಮೇಳ ಮತ್ತು ಖಾದಿ ಉತ್ಸವವು ಜನವರಿ 4ರವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದಾರೆ, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ.
ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ಅಕ್ಕ ಕೆಫೆಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ.
ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ, ಈ ವರ್ಷ ಸಹ ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.
ಹಈ ಮೇಳದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ನಾರಿನ ಉತ್ಪನ್ನದ ಬ್ಯಾಗ್ ಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ ಮಹಿಳೆಯರು, ಮಕ್ಕಳಿಗೆ ಅಗತ್ಯ ವಾದ ಎಲ್ಲಾ ವಸ್ತುಗಳು ಕಡಿಮೆ ಬೆಲೆಗೆ ದೊರೆಯಲಿದೆ.