ಚಾ.ನಗರ ಹಾಡಿಗಳಿಗೆ ವಿದ್ಯುತ್‌ ಸೌಲಭ್ಯ -ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಸೆಸ್ಕ್‌ ಅಧ್ಯಕ್ಷರೂ ಆದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಭರವಸೆ ನೀಡಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು ಎಂದು ಸೂಚಿಸಿದರು.

ಆನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ, ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರು ಮಾತನಾಡಿ,ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್‌ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ ಎಂದು ಹೇಳಿದರು.

31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್‌ ಪೂರೈಸಲು ಯಾವುದೇ ಸರ್ಕಾರ 42 ಕೋಟಿ ರೂ.ಗಳನ್ನು ಖರ್ಚು ಮಾಡುವುದು ತೀರಾ ವಿರಳ. ಆದರೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಆದಾಯದ ಬಗ್ಗೆ ಯಾವುದೇ ವಿಳಂಬ ಮಾಡದೆ, ಮೂಲಭೂತ ಹಕ್ಕು ಎಂದು ಪರಿಗಣಿಸಿ ವಿದ್ಯುತ್‌ ಪೂರೈಸಲು ಒಪ್ಪಿಗೆ ನೀಡಿದರು. ಆದರೆ, ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಶೇ.52ರಷ್ಟು ಭೂಪ್ರದೇಶ ಅರಣ್ಯ ಪ್ರದೇಶದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು ಎಂದು ಹೇಳಿದರು.

ಉಳಿದ ಹಾಡಿಗಳಿಗೂ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಅದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಉಳಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ, ಗಂಗಾ ಕಲ್ಯಾಣ, ಕುಸುಮ್‌-ಬಿ, ಕುಸುಮ್‌-ಸಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸೆಸ್ಕ್‌ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕೆಲಸಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ ಶಾಖೆ) ಶರಣಮ್ಮ ಎಸ್‌. ಜಂಗಿನ್‌, ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ. ಸಂ) ಬಿ.ಆರ್. ರೂಪ‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ಆಂತರಿಕ ಪರಿಶೋಧನೆ) ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರು(ಖರೀದಿ) ಎಲ್‌. ಲೋಕೇಶ್‌, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್‌(ವಿ) ಸೋಮಶೇಖರ್‌ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.