ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸತತ ಮಳೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಗಳು ಹಾಗೂ ಸಿಇಒಗಳ ಸಭೆ ನಡೆಸಿ ಕಡಕ್ ಸೂಚನೆಗಳನ್ನು ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಕಚೇರಿಯಲ್ಲಿ ಜಾಂಡಾ ಊರದೆ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರಿತು ಜನರಿಗೆ ಸ್ಪಂದಿಸಬೇಕು ಮಳೆ ಅನಾಹುತ ತಡೆಯಲು ಕ್ರಮ ತೆಗೊಬೇಕು ಎಂದು ಸಿಎಂ ಕಠಿಣ ಸೂಚನೆ ನೀಡಿದರು.
ಇದೇ ವೇಳೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ, ಗುಡ್ದ ಕುಸಿತ ಸಂಭವಿಸಿ ಅನಾಹುತವಾಗಿದ್ದರ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಎಂ, ತಕ್ಷಣ ಅಲ್ಲಿಗೆ ತೆರಳುವಂತೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ ಏಕೆ ಎಂದು ತರಾಟೆಗೆ ತೆಗೆದುಕೊಂಡರು.
ತಕ್ಷಣ ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಿ, ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಡಕ್ ಆದೇಶ ನೀಡಿದರು.
ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಆಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದು ಸೂಚಿಸಿದರು.
ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕು,ಆದರೆ ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ,ಇಂತಹ ವಿಳಂಬ ಸಹಿಸಲು ಸಾಧ್ಯವಿಲ್ಲ ಗೊತ್ತಾಯ್ತಾ ಎಂದು ಎಚ್ಚರಿಸಿದರು.
ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಕಳಪೆ ಫಲಿತಾಂಶ ಬರಲು ಕಾರಣವೇನು ಎಂದು ಮುಖ್ಯ ಮಂತ್ರಿಗಳು ಕಾರವಾಗಿ ಪ್ರಶ್ನಿಸಿದರು. ಈ ಬಗ್ಗೆ ಆತ್ಮಾವಲೋಕನ ನಡೆಸಿ,ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ ಎಂದು ತಿಳಿದುಕೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿ ಉಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು, ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು ಎಂದು ಸಲಹೆ ನೀಡಿದರು.
ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ವಿಳಂಬ ಮಾಡಬಾರದು,
ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ,ತಕ್ಷಣ ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಸಿಎಂ ಆದೇಶಿಸಿದರು.