ಬೆಂಗಳೂರು: ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಅವರೊಂದಿಗೆ ನಿಂತ ಸರ್ಕಾರ ನುಡಿದಂತೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ ಮುಖ್ಯ ಮಂತ್ರಿಗಳು,
ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ ಎಂದು ತಿಳಿಸಿದರು.
ಕೆಲವು ರೈತರು ಜಮೀನು ನೀಡಲು ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದೆ,ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ಹೇಳಿದರು.
ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಾಗುವುದು, ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ತಿಳಿಸಿದರು.
ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕು, ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ ಎಂದು ಸಿಎಂ ಹೇಳಿದರು.
1777 ಎಕರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು ಎಂದು ವಿವರಿಸಿದರು.
ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆಗೆ ಉತ್ತೇಜನ ನೀಡುವುದು ಅಗತ್ಯವಿದೆ.
ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಪುನರುಚ್ಛರಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.