ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸಿದ್ದರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯವರು ಟೀಕಿಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತಿಸೋದು ವಾಡಿಕೆ,ಆದರೆ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಇಲ್ಲ, ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗೆ ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದು ಸಿಎಂ ತಿರುಗೇಟು ನೀಡಿದರು.
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್ ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಸರ್ಕಾರಕ್ಕೆ ಎರಡು ವರ್ಷತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ನಮ್ಮ ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ ಎಂದು ತಿಳಿಸಿದರು.