ಅಣೆಕಟ್ಟೆಗಳ ಸುರಕ್ಷತೆಗೆ ತಾಂತ್ರಿಕ ಸಮಿತಿ ವರದಿ ಬಂದ ನಂತರ ಕಾಮಗಾರಿ: ಡಿಕೆಶಿ

ಕಬಿನಿ: ರಾಜ್ಯದ ಅಣೆಕಟ್ಟೆಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು,ಅದರ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಬಿನಿ ಅಣೆಕಟ್ಟು ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ, ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ ವರ್ಷ ತುಂಬಿದೆ. ಕಬಿನಿಯಿಂದ ನಮಗೆ ಕಷ್ಟ ಕಾಲದಲ್ಲೂ ಸಹಾಯವಾಗುತ್ತಿದೆ ಎಂದು ಹೇಳಿದರು.

ಈ ಪ್ರದೇಶ ವಿಸ್ತರಣೆ ಮಾಡಬೇಕು ಎಂದು ನಮ್ಮ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 35 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ 88 ಕೋಟಿ ಮೊತ್ತದ ಹನಿ ನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿಯಾದ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ವಿಚಾರದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿದೆ. ಈ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಕೆಶಿ ಹೇಳಿದರು.

ಕಬಿನಿ ಉತ್ಸವ ಮಾಡುವ ಬಗ್ಗೆ ಒತ್ತಾಯ ಇದೆಯೆ‌ ಎಂಬ ಪ್ರಶ್ನೆಗೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಸಚಿವರು ಹಾಗೂ ಇತರರೊಂದಿಗೆ ಚರ್ಚೆ ಮಾಡುತ್ತೇನೆ. ಈ ಕಾರ್ಯಕ್ರಮಗಳ ಮೂಲಕ ಪ್ರವಾಸೋದ್ಯಮ ಆಕರ್ಷಣೆ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ ಎಂದು ತಿಳಿಸಿದರು.

ಬಟಾನಿಕಲ್ ಗಾರ್ಡನ್ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿದೆಯಲ್ಲ ಎಂದು ಕೇಳಿದಾಗ, ಇದಕ್ಕೆ ಬಂಡವಾಳ ಹೂಡಿಕೆ ಮಾಡುವವರು ಮುಂದೆ ಬರಬೇಕು. ನಮ್ಮ ಆದ್ಯತೆ ಇರುವುದು ನೀರಿನ ಸಮರ್ಪಕ ಬಳಕೆ ಹಾಗೂ ಅಣೆಕಟ್ಟು ಸುರಕ್ಷತೆ ಬಗ್ಗೆ ಇದೆ ಎಂದು ಡಿಸಿಎಂ‌ ತಿಳಿಸಿದರು.

ದಿಢೀರನೆ ದೆಹಲಿ ಪ್ರವಾಸ ಹೋಗಿದ್ದೀರಿ ಎಂಬ ಮತ್ತೊಂದು ಪ್ರಶ್ನೆಗೆ,ನಾನು ಸಿಎಂಗೆ ಮಾಹಿತಿ ನೀಡಿಯೇ ಕಾರ್ಯಕ್ರಮದಿಂದ ಹೊರಟೆ. ಮಾರ್ಗ ಮಧ್ಯದಲ್ಲೇ ನನ್ನ ಬೆಂಗಾವಲು ವಾಹನ ಅಪಘಾತಕ್ಕೀಡಾಯಿತು. ತಾಯಿ ಚಾಮುಂಡೇಶ್ವರಿ ಕೃಪೆ ಯಾರಿಗೂ ಅಪಾಯವಾಗಿಲ್ಲ, ವಕೀಲರ ಜೊತೆ ಸಭೆ ನಿಗದಿಯಾದ ಕಾರಣ, ನಾನು 7.30ಕ್ಕೆ ತೆರಳಿ, 9.30ಕ್ಕೆ ವಾಪಸ್ ಬಂದಿದ್ದೇನೆ. ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದೇನೆ. ನನ್ನ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೋಗಿದ್ದೆ, ಅದನ್ನು ಮುಗಿಸಿಕೊಂಡು ಬಂದಿದ್ದೇನೆ ಇದರ ಹೊರತಾಗಿ ಯಾವುದೇ ರಾಜಕಾರಣ ಇಲ್ಲ ಎಂದು ಸ್ಪಷ್ಟಪಡಿಸಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ,ಬಿಜೆಪಿಯವರಿಗೆ ಯಾವಾಗಲೂ ನನ್ನ ಮೇಲೆ ಪ್ರೀತಿ ಜಾಸ್ತಿ, ನಾನು ಹೆಚ್ಚು ಬಲಿಷ್ಠವಾಗಿರುವುದರಿಂದ ನನ್ನ ಮೇಲೆ ಪ್ರೀತಿ ಜಾಸ್ತಿ ಎಂದು ವ್ಯಂಗ್ಯವಾಡಿದರು.