ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆ ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.
ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ, ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ,ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ, ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ಎಂದು ಪ್ರಶ್ನಿಸಿದರು.
ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದು ಸಮರ್ಥಿಸಿದರು.
ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.
ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ಎಂದು ಕೆಳಿದರು.
ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ,ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು
ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ತಿಳಿಸಿದರು.

