ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.
ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ ನಡೆಸಿದ ಸೆಸ್ಕ್ ಜಾಗೃತದಳ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅನಧಿಕೃತವಾಗಿ ವಿದ್ಯುತ್ ಸಂಪರ್ಕವನ್ನು ಪಡೆಯುವ ಮೂಲಕ ನಿಗಮಕ್ಕೆ ನಷ್ಟ ಉಂಟುಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸೆಸ್ಕ್ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಜಾಗೃತದಳದ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿ 8 ತಂಡಗಳಾಗಿ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಏಕಲವ್ಯನಗರ, ಬಂಬೂಬಜಾರ್, ಇಟ್ಟಿಗೆಗೂಡು ಹಾಗೂ ಇತರೆ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾವರಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಶರಣಮ್ಮ ಎಸ್. ಜಂಗಿನ್, ಸೆಸ್ಕ್ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಬಿ.ಎಸ್. ಚಂದ್ರಶೇಖರ್, ಪೋಲೀಸ್ ಉಪಾಧೀಕ್ಷಕಿ ಎಂ.ಜೆ.ಪೃಥ್ವಿ, ಸೆಸ್ಕ್ ಜಾಗೃತದಳದ ಪೊಲೀಸ್ ನಿರೀಕ್ಷಕಿ ಎಂ. ಜಯರತ್ನ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಸೈಯದಾ ಕೌಸರ್ ಬೇಗಂ ಮತ್ತಿತರರು ಪಾಲ್ಗೊಂಡಿದ್ದರು.

