ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮಕ್ಕೆ ಅಶೋಕ್ ಒತ್ತಾಯ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು ಮಾಡಿದ ತ್ಯಾಗ, ಬಲಿದಾನದಿಂದಾಗಿ ನಾವು ಸ್ವಾತಂತ್ರ್ಯ ಪಡೆದಿದ್ದೇವೆ. ನಾವೆಲ್ಲರೂ ಪ್ರಜಾಪ್ರಭುತ್ವದಲ್ಲಿ ನೆಮ್ಮದಿಯಿಂದ, ಸಂತೋಷದಿಂದ ಬದುಕುತ್ತಿದ್ದೇವೆ. ಆದರೆ ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆ ಮಾಡುವ ವಿಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್‌ 15 ರಂದು ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದು ಅವರು ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮನೆ, ಆಸ್ತಿ ಕಳೆದುಕೊಂಡು ಜೈಲಿಗೆ ಹೋಗಿದ್ದರು. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಈ ಸಚಿವರಿಗೆ ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿಲ್ಲ. ಇಂತಹವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಚಿವರನ್ನಾಗಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದು ಸಚಿವ ಜಮೀರ್‌ ಅಹ್ಮದ್‌ ದೇಶಕ್ಕೆ ಮಾಡಿರುವ ಅಪಮಾನ. ಸಂವಿಧಾನದಡಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.ಅವರು ಈ ರೀತಿ ಮಾಡುವುದು ಸಂವಿಧಾನಕ್ಕೆ ತೋರುವ ಅಗೌರವ. ಇದರಿಂದ ಆಡಳಿತಕ್ಕೆ ಒಳಿತಾಗುವುದಿಲ್ಲ. ಹಾಗಾಗಿ ಸಚಿವ‌ ಜಮೀರ್ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಆಗ್ರಹಿಸಿದರು.

ಇಲ್ಲವಾದರೆ ಎಲ್ಲ ಸಚಿವರು ಹೀಗೆಯೇ ಮಾಡುತ್ತಾರೆ. ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದವರ ವಿರುದ್ಧ ಇನ್ನೂ ಕಠಿಣ ಕ್ರಮ ಆಗಿಲ್ಲ. ಈಗ ಸಚಿವರು ಕೂಡ ದೇಶಕ್ಕೆ ಅಗೌರವ ತೋರಿದ್ದಾರೆ. ಸಚಿವರ ವಿರುದ್ಧ ಕ್ರಮ ವಹಿಸದೇ ಇದ್ದರೆ ಜನರೇ ಬುದ್ಧಿ ಕಲಿಸುತ್ತಾರೆ ಎಂದು ಎಚ್ಚರಿಸಿದರು.