ಎಸ್ಐಆರ್; ಗೊಂದಲವಿಲ್ಲದೆ ಮತಗಟ್ಟೆಗಳಲ್ಲಿ ವಿಚಾರಣಾ ಪ್ರಕ್ರಿಯೆ-ಡಿಸಿ

ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತಗಟ್ಟೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ವಿಚಾರಣೆ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧ ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಸೆಪ್ಟೆಂಬರ್ 8 ರಿಂದ 14ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಒಟ್ಟು 1981 ಹಕ್ಕು, ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಮತದಾರರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ಕಾರ್ಯ ಪ್ರಗತಿಯಲ್ಲಿದೆ. ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥಪಡಿಸಲು ವಿಚಾರಣೆಗೆ ಹಾಜರಾಗುವಂತೆ ಈವರೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 7469 ಮಂದಿಗೆ ನೋಟಿಸ್ ನೀಡಲಾಗಿದೆ, 11 ಮಂದಿ ಮತದಾರರಿಗೆ ನೋಟಿಸ್ ತಲುಪಿಸಬೇಕಾಗಿದೆ. ಈ ಪೈಕಿ ಈಗಾಗಲೇ 4191 ಮತದಾರರನ್ನು ವಿಚಾರಣೆ ನಡೆಸಲಾಗಿದ್ದು, 3278 ಮಂದಿ ವಿಚಾರಣೆ ಆಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಹನೂರು, ಕೊಳ್ಳೇಗಾಲ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ವಿಚಾರಣೆ ಮುಗಿಯುವ ಹಂತದಲ್ಲಿದೆ, ಹೆಚ್ಚಿನ ಸಂಖ್ಯೆಯ ವಿಚಾರಣೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಇದೆ. ಮತದಾರರ ವಿಚಾರಣಾ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಿಚಾರಣೆ ವೇಳೆ ಮತಗಟ್ಟೆಗಳಲ್ಲಿ ನೂಕುನುಗ್ಗಲು ಉಂಟಾಗಿ ಮತದಾರರು ಗೊಂದಲಕ್ಕೆ ಒಳಗಾಗುತ್ತಿರುವ ಬಗ್ಗೆ ದೂರುಗಳನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ತಾಲೂಕುಮಟ್ಟದಲ್ಲಿ ಸಭೆ ನಡೆಸಿ ಮತಗಟ್ಟೆಗಳಲ್ಲಿ ವಿಚಾರಣೆಯನ್ನು ವ್ಯವಸ್ಥಿತವಾಗಿ ನಡೆಸಿ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಶ್ರೀ ರೂಪಾ ಹೇಳಿದರು.

ಪಟ್ಟಿಯಲ್ಲಿ ಹಕ್ಕು, ಆಕ್ಷೇಪಣೆಗಳ ವಿವರಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಎಸ್.ಐ.ಆರ್ ಪ್ರಕ್ರಿಯೆಗಾಗಿ ತಾವು ನಿಯೋಜಿಸಿರುವ ಬಿ.ಎಲ್.ಒ-2 ಗಳ ಮೂಲಕ ಪರಿಶೀಲಿಸಬೇಕು.18 ವರ್ಷ ತುಂಬಿದ ಹೊಸ ಮತದಾರರನ್ನು ಮಿಂಚಿನ ನೊಂದಣಿ ಮೂಲಕ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಮತಗಟ್ಟೆ ಅಧಿಕಾರಿಗಳಿಗೆ, ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಯುವ ಮತದಾರರ ಸೇರ್ಪಡೆಗಾಗಿ ಕಾಲೇಜು ಹಂತದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಕಾಲೇಜು ಪ್ರಾಂಶುಪಾಲರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಒಟ್ಟಾರೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವವರೆಗೆ ನೊಂದಾಯಿತ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾದಿಕಾರಿ ಶ್ರೀರೂಪ ಅವರು ಸಭೆಯಲ್ಲಿ ಕೋರಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಸ್. ಬಾಲಸುಬ್ರಹ್ಮಣ್ಯ, ಎಚ್.ಎಸ್. ತೋಂಟದಾರ್ಯಸ್ವಾಮಿ, ಎಂ. ಚಿಕ್ಕಮಹದೇವು, ಎಸ್. ರಾಮಚಂದ್ರ, ಆರ್. ಚೇತನ್ ಕುಮಾರ್, ಎನ್. ರವಿ ಮತ್ತಿತರರು ಉಪಸ್ಥಿತರಿದ್ದರು.