ಕಾಂಗ್ರೆಸ್, ಜೆಡಿಎಸ್ ಶಿರಾದಲ್ಲಿ ರಾಜಕೀಯ ನಡೆಸಿದೆ; ಅಭಿವೃದ್ಧಿಪಡಿಸಿಲ್ಲ -ಡಿಸಿಎಂ

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಿರಾ ಕ್ಷೇತ್ರದಲ್ಲಿ ರಾಜಕೀಯ ನಡೆಸಿದೆಯೇ ಹೊರತು ಕಿಂಚಿತ್ತೂ ಅಭಿವೃದ್ಧಿಪಡಿಸಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟೀಕಿಸಿದರು.
ನಗರದ ಮಹಾಲಕ್ಷ್ಮೀ ಲೇಔಟ್‍ನಲ್ಲಿ ಸಚಿವ ಕೆ. ಗೋಪಾಲಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿರಾ ವಿಧಾನಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಡಾ. ಅಶ್ವತ್ಥನಾರಾಯಣ ಪಾಲ್ಗೊಂಡು ಮಾತನಾಡಿದರು.
ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಸಬೇಕಾದರೆ ನಾನು ಶಿರಾಗೆ ಹೋಗಿಬಂದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಈ ಕ್ಷೇತ್ರದಿಂದ ಗೆಲ್ಲಿಸಲಾಗಿದೆ. ಆದರೆ, ನಿರಂತರವಾಗಿ ಅಲ್ಲಿ ರಾಜಕೀಯ ನಡೆದಿದೆಯೇ ಹೊರತು ಕಿಂಚಿತ್ತೂ ಅಭಿವೃದ್ಧಿಯಾಗಿಲ್ಲ ಎಂದರು.
ಹೆದ್ದಾರಿಗೆ ಹೊಂದಿಕೊಂಡಿರುವ ಆ ಪಟ್ಟಣದಲ್ಲಿ ಒಂದು ಕೈಗಾರಿಕೆ ಇಲ್ಲ. ಕೃಷಿಕರಂತೂ ಕಷ್ಟದ ಜೀವನ ನಡೆಸುತ್ತಿದ್ದಾರೆಂದು ಡಾ. ಅಶ್ವತ್ಥನಾರಾಯಣ ದೂರಿದರು.
ಅಭಿವೃದ್ಧಿ, ಜನರ ಕೌಶಲ್ಯ, ಶಿಕ್ಷಣ ಇತ್ಯಾದಿಗಳ ಮಹತ್ವ ಗೊತ್ತಿಲ್ಲದ ನಾಯಕರು ಜನರನ್ನು ಸದಾ ಕತ್ತಲೆಯಲ್ಲೇ ಇಟ್ಟರು. ಸಮಸ್ಯೆಗಳನ್ನು ಯಾವಾಗಲೂ ಜೀವಂತವಾಗಿಟ್ಟುಕೊಂಡು ಜನರ ಕಣ್ಣೀರಿನ ಮೇಲೆ ರಾಜಕೀಯ ಮಾಡುವುದೇ ಕಾಂಗ್ರೆಸ್ ಮತ್ತು ಜೆಡಿಎಸ್ ಚಾಳಿ ಎಂದರು.
ಕೆಲ ನಾಯಕರು ಮತ್ತು ಪಕ್ಷಗಳಿಗೆ ಚುನಾವಣೆ ಎಂದರೆ ಭಾವನಾತ್ಮಕ ವಿಷಯಗಳನ್ನು ಕೆದಕುವುದು ಹಾಗೂ ಜಾತಿಯಂತಹ ಸೂಕ್ಷ್ಮ ವಿಚಾರಗಳನ್ನು ಮುನ್ನೆಲೆಗೆ ತಂದು ಬೇಳೆ ಬೇಯಿಸಿಕೊಳ್ಳುವುದು ಅಭ್ಯಾಸವಾಗಿದೆ ಎಂದು ಅವರು ತಿಳಿಸಿರು.
ಜನರ ಮುಂದೆ ಬಂದಾಗ ಪ್ರಗತಿಯ ಬಗ್ಗೆ ಮಾತನಾಡಬೇಕು. ನಮಗೆ ಹಾಗೆ ಮಾತನಾಡಲು ಧೈರ್ಯವಿದೆ ಎಂದು ಡಿಸಿಎಂ ಕೃಷಿಕರ ಪಕ್ಷ ಎಂದು ಹೇಳಿಕೊಳ್ಳುವ ಪಕ್ಷಗಳ ನಾಯಕರು ರೈತರಿಗಾಗಿ ಏನು ಮಾಡಿದ್ದಾರೆಂದು ಪ್ರಶ್ನಿಸಿದರು.
ಕೆಲವರಿಗೆ ರಾಜಕೀಯ ಎಂದರೆ ತಾವು, ತಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಬೆಳೆಸಿಕೊಳ್ಳುವುದೇ ಆಗಿದೆ. ನಿರಂತರವಾಗಿ ಜಾತಿ ಹೆಸರು ಹೇಳಿಕೊಂಡೇ ತಮ್ಮ ಕುಟುಂಬಗಳನ್ನು ಬೆಳೆಸಿ, ಮನೆಯಲ್ಲಿ ಇದ್ದವರೆಲ್ಲರನ್ನೂ ನಾಯಕರನ್ನಾಗಿ ಬೆಳೆಸಿಕೊಂಡರು. ಅವರನ್ನು ನಂಬಿದ ಕಾರ್ಯಕರ್ತರು ಬೀದಿ ಪಾಲಾದರು. ಇಂತಹ ನಾಯಕರು ಹಾಗೂ ಅವರು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ನಮಗೆ ಬೇಕೆ ಎಂಬುದನ್ನು ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.