ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು -ಸಚಿವ ಡಾ.ಕೆ.ಸುಧಾಕರ್

ಚಿತ್ರದುರ್ಗ: ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣಕ್ಕೆ ಭೂಮಿ ಗುರುತಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಿ 30 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣವಾಗಲಿರುವ ಜಾಗವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೀಪಾವಳಿ ಹಬ್ಬದ ಉಡುಗೊರೆಯಾಗಿ ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಘೋಷಣೆ ಮಾಡಿ 50 ಕೋಟಿ ರೂ. ಅನುದಾನ ನೀಡಿದ್ದಾರೆಂದರು.
ಚಿತ್ರದುರ್ಗದಲ್ಲಿ 20 ಎಕರೆಗೂ ಹೆಚ್ಚು ವಿಸ್ತೀರ್ಣದ ಭೂಮಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಕೆಲ ಹಳೆ ಕಟ್ಟಡಗಳಿದ್ದು, ಅದನ್ನು ಕೂಡ ತೆರವು ಮಾಡಬಹುದು. ಶೀಘ್ರದಲ್ಲೇ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ, 30 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ನರ್ಸಿಂಗ್, ಅರೆವೈದ್ಯಕೀಯ, ಲ್ಯಾಬ್ ಮೊದಲಾದ ಕೋರ್ಸುಗಳನ್ನು ಇಲ್ಲೇ ಆರಂಭಿಸಲಾಗುವುದು. ಎಲ್ಲ ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಯಲ್ಲಿ 700 ಹಾಸಿಗೆ ಇರುವಂತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಇದೇ ವರ್ಷದಲ್ಲಿ ಇನ್ನೂ ಎರಡು ಹೊಸ ವೈದ್ಯಕೀಯ ಕಾಲೇಜುಗಳ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಡಿಸೆಂಬರ್ ಒಳಗೆ ಚಿಕ್ಕಮಗಳೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.
ಗೃಹಸಚಿವ ಬಸವರಾಜ ಬೊಮ್ಮಾಯಿ, ಸಂಸದ ಎ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.