ರಾಜ್ಯದಲ್ಲಿ ಗ್ರಾಮ ಸ್ವರಾಜ್ಯ ಉದಯವಾಗಿದೆ -ಡಿಸಿಎಂ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದ್ದು, ರಾಮನಗರ ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳ ಪ್ರತಿ ಗ್ರಾಮದಲ್ಲೂ ಕಮಲ ಅರಳಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಗ್ರಾ.ಪಂ. ಚುನಾವಣೆ ಫಲಿತಾಂಶದ ಬಗ್ಗೆ ಗುರುವಾರ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಉಸ್ತುವಾರಿಯಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ 234 ಸ್ಥಾನಗಳಲ್ಲಿ ಪಕ್ಷ ಜಯ ಗಳಿಸಿದೆ ಎಂದರು.
ತಳಮಟ್ಟದಲ್ಲಿ ಅಸ್ತಿತ್ವವನ್ನೇ ಹೊಂದಿಲ್ಲದ ನಮ್ಮ ಪಕ್ಷ ಕಾಂಗ್ರೆಸ್, ಜೆಡಿಎಸ್‍ಗೆ ಸಡ್ಡು ಹೊಡೆದು ಸಾಧನೆ ಮಾಡಿದೆ ಎಂದು ಡಿಸಿಎಂ ಹೇಳಿದರು.
ಉಳಿದಂತೆ ಬೀದರ್‍ನಿಂದ ಚಾಮರಾಜನಗರದವರೆಗೆ, ಕೋಲಾರದಿಂದ ಕಾರವಾರದವರೆಗೆ ಬಿಜೆಪಿ ರಾಜ್ಯದ ಉದ್ದಗಲಕ್ಕೂ ಉತ್ತಮ ಸಾಧನೆ ಮಾಡಿದೆ. ಈ ಮೂಲಕ ಕರ್ನಾಟಕದಲ್ಲಿ ನಿಜವಾದ ಗ್ರಾಮ ಸ್ವರಾಜ್ಯ ಉದಯವಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಪಕ್ಷವೂ ಹಿಂದೆಂದಿಗಿಂತಲೂ ಶಕ್ತಿಶಾಲಿಯಾಗಿ ಹೊರಹೊಮ್ಮಿದೆ. ಗ್ರಾಮ ಗ್ರಾಮದಲ್ಲೂ ಕೇಸರಿ ಬಾವುಟ ಹಾರಿರುವುದರಿಂದ ಮುಂದಿನ ಚುನಾವಣೆಗಳಿಗೆ ಈ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ನೆಲೆಯನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ, ಜನಪರ ಆಡಳಿತ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಧಾರಣಾ ಕಾರ್ಯಕ್ರಮಗಳಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.