ಬೆಂಗಳೂರು: ಕನಿಷ್ಠ 25 ಸಾವಿರ ರೂ. ವೇತನ ನಿಗದಿ, ಸೇವಾ ಭದ್ರತೆ ಒದಗಿಸಬೇಕೆಂಬ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದರು.
ಸೋ ಮವಾರ ಈ ಕುರಿತು ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ವಿಷಯವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ನಿರ್ಣಯ ಕೈಗೊಳ್ಳುವಂತೆ ಸಭಾಪತಿ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ಪರಿಷತ್ ಸದಸ್ಯರು ಮನವಿ ಮಾಡಿದ್ದಾರೆ. ಹತ್ತು ವರ್ಷ ಸೇವಾವಧಿ ಪೂರೈಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ, ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಕಾಯಂ ಆಗುವವರೆಗೂ ಬಳಸಿಕೊಳ್ಳುತ್ತಿರಬೇಕು. ಮಾಸಿಕ ಕನಿಷ್ಠ 25 ಸಾವಿರ ರೂ. ಗೌರವಧನ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ – ಡಿಸಿಎಂ

