ಸೋಂಕಿತರ ಮನೆಗಳಿಗೆ ಭೇಟಿ ನೀಡಿದ ಸಿಇಒ; ಗ್ರಾಪಂ ಮಟ್ಟದಲ್ಲಿ ಸಹಾಯವಾಣಿ ತೆರೆಯಲು ಸೂಚನೆ

ಮೈಸೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ತಾಲ್ಲೂಕಿನ ಕೆಲ ಗ್ರಾಪಂಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ.ಯೋಗೀಶ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ನಾಗವಾಲ, ಧನಗಹಳ್ಳಿ, ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಾಗವಾಲ ಗ್ರಾಪಂ ಭೇಟಿ ನೀಡಿದ ವೇಳೆ ಅಲ್ಲಿನ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಜತೆಗೆ ಆಶಾ ಕಾರ್ಯ ಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಮನೆ ಮನೆ ಸರ್ವೆ ಸಮೀಕ್ಷೆ ಕಾರ್ಯ ಅಪೂರ್ಣಗೊಂಡಿದ್ದು, ಅದನ್ನು ಪೂರ್ಣಗೊಳಿಸಲು ಸೂಚಿಸಿದರು.
ನರೇಗಾ ಯೋಜನೆಯಡಿ ನಡೆಯುತ್ತಿರುವ ಕಲ್ಯಾಣಿ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ವೀಕ್ಷಿಸಿದರು.
ದೊಡ್ಡಮರಗೌಡನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕಾರ್ಯಪಡೆ, ಸೋಂಕಿತರು ಮತ್ತು ಮಹಾತ್ಮ-ನರೇಗಾ ಯೋಜನೆಯಡಿ ಕಾಮಗಾರಿ ಪ್ರಗತಿ ಪರಿಶೀಲನೆ, ಅಂತರ್ಜಲ ಚೇತನ ಯೋಜನೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಹೋಮ್ ಐಸೋಲೇಷನ್ನಲ್ಲಿರುವವರನ್ನು ನೋಡಿಕೊಳ್ಳುವುದು ಗ್ರಾಪಂ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜವಬ್ದಾರಿಯಾಗಿದೆ ಎಂದು ತಿಳಿಸಿದರು.
ಧನಗಹಳ್ಳಿ ಗ್ರಾಪಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಾತ್ಮ ಗಾಂಧಿ-ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದರು. ಕೋವಿಡ್ ಸಂಬಂಧಿಸಿದಂತೆ ಅಂಕಿ ಅಂಶ ಮಾಹಿತಿ ಪಡೆದುಕೊಂಡರು.
ಸಿಇಒ ಎ.ಎಂ.ಯೋಗೀಶ್ ಅವರು ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಹಾಯಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲು ಸಿಇಒ ಆದೇಶಿಸಿದರು. ಅದರಂತೆ ಸಹಾಯವಾಣಿ ಕೇಂದ್ರದಿಂದ ಕೊರೊನಾದಿಂದ ಬಳಲುತ್ತಿರುವವರಿಗೆ ಸಹಾಯ ಮಾಡಲು ಸೂಚಿಸಿದರು.