ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವೆಲ್ಲ ಪರೀಕ್ಷೆ ಬರೆದಿದ್ದೇವೆ. ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಮಾರ್ಮಿಕವಾಗಿ ಹೇಳಿದರು.
ಸಚಿವ ಯೋಗೇಶ್ವರ ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನನ್ನ ವೈಯಕ್ತಿಕ ಸಮಸ್ಯೆ ಹಾಗೂ ರಾಜ್ಯ ಸರ್ಕಾರ ಮತ್ತು ರಾಜ್ಯ ಬಿಜೆಪಿ ಮೂಲಭೂತ ಸಮಸ್ಯೆಗಳ ಬಗ್ಗೆ ಹೈಕಮಂಡ್ʼಗೆ ವಿವರಣೆ ನೀಡಿದ್ದೇನೆ. ಸರ್ಕಾರ ಹಾಗೂ ಪಕ್ಷದ ಮೂಲಭೂತ ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು.
ಏನೇ ಆಗಲಿ ಪರೀಕ್ಷೆ ಬರೆಯಲಾಗಿದ್ದು, ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಖಚಿತ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಒಬ್ಬ ಜವಾಬ್ದಾರಿ ಸಚಿವನಾಗಿ ನಾನು ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದೇನೆ. ನನ್ನ ವೈಯಕ್ತಿಕ ನೋವುಗಳು ಹಾಗೂ ಸಮಸ್ಯೆಗಳನ್ನು ನಮ್ಮ ದೆಹಲಿ ನಾಯಕರ ಮುಂದೆ ಹೇಳಿದ್ದೇನೆ. ಪಕ್ಷಕ್ಕೆ ಧಕ್ಕೆ ಉಂಟಾಗಬಾರದು ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಹಿನ್ನಲೆಯಲ್ಲಿ, 4 ಗೋಡೆಗಳ ಮಧ್ಯೆ ವಿವರಣೆ ನೀಡಿದ್ದೇನೆ ಎಂದರು.
ಅಡ್ಜೆಸ್ಟ್ʼಮೆಂಟ್ ಪಾಲಿಟಿಕ್ಸ್ ಬೇಡ
ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ನನಗೆ ತುಂಬಾ ತೊಂದರೆಯಾಗುತ್ತಿದೆ. ಈ ಭಾಗದಲ್ಲಿ ನಮ್ಮ ಬಿಜೆಪಿ ಪಕ್ಷದ ನಾಯಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅಡ್ಜೆಸ್ಟ್ʼಮೆಂಟ್ ಪಾಲಿಟಿಕ್ಸ್ ಬೇಡ. ಇದಕ್ಕೆ ಕೊನೆಹಾಡಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ. ಕರ್ನಾಟಕದಲ್ಲಿ ಅತೀ ಉತ್ತಮವಾದ ಸರ್ಕಾರ ಇರಬೇಕು. ಪಕ್ಷ ಸಂಘಟನೆ ಸಹ ರಾಜ್ಯದ ಇತರ ಭಾಗಗಳಂತೆ ಹಳೇ ಮೈಸೂರು ಭಾಗದಲ್ಲೂ ನಡೆಯಬೇಕು ಎಂದು ಸಚಿವರು ಹೇಳಿದರು.
ನನಗೆ ಕೋಲಾರ ಜಿಲ್ಲೆ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಧ್ಯಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಇದ್ದಾರೆ. ಈ ನಿಟ್ಟಿನಲ್ಲಿ ನನಗೆ ಕೋಲಾರ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತರು
ನಾನು ಹಾಗೂ ರಮೇಶ್ ಜಾರಕಿಹೊಳಿ 20 ವರ್ಷದ ಸ್ನೇಹಿತರು. ಅವರ ಇತ್ತೀಚಿನ ರಾಜಕೀಯ ನಿಲುವಿನ ಬಗ್ಗೆ ನಾನು ಚರ್ಚಿಸಿಲ್ಲ. ಭೇಟಿ ಸಹ ಮಾಡಿಲ್ಲ. ರಮೇಶ್ ಜಾರಕಿಹೊಳಿ ಅವರು ಮುಂಬಯಿಗೆ ಹೋಗಿ ರಾಜೀನಾಮೆ ನೀಡುವ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಅವರ ಪ್ರಚಲಿತ ರಾಜಕೀಯ ನಿರ್ಣಯದ ಬಗ್ಗೆ ಗೊತ್ತಿಲ್ಲ. ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಕೊಡುವುದಿಲ್ಲ ಎಂದು ಸಚಿವ ಯೋಗೇಶ್ವರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

