ಬೆಂಗಳೂರು: ಇದೊಂದು ಹಗರಣ, ಭ್ರಷ್ಟಾಚಾರಗಳ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದರು.
ಮಕ್ಕಳಿಗೆ ನೀಡುವ ಸ್ವೆಟರ್ ನಲ್ಲೂ ಹಗರಣ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಮಯದಲ್ಲಿ, ಮಕ್ಕಳು ಶಾಲೆಗೆ ಹೋಗದ ಸಮಯದಲ್ಲಿ, ಅವರಿಗೆ ಸ್ವೆಟರ್ ನೀಡದೇ ಹಗರಣ ನಡೆಸಲಾಗಿದೆ. ಈ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಹಗರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶಾಲಾ ಮಕ್ಕಳಿಗೆ ಸ್ವೆಟರ್ ನೀಡುವ ಹಗರಣದಲ್ಲಿ ಕೋಮಲ್, ಜಗ್ಗೇಶ್ ಅವರು ಭಾಗಿಯಾಗಿದ್ದಾರೋ, ಇಲ್ಲವೋ ಎಂಬುದರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಒಂದು ಸರ್ಕಾರ ಮಕ್ಕಳಿಗೆ ಸ್ವೆಟರ್ ನೀಡಲು ತೀರ್ಮಾನ ಮಾಡಿರುವುದು ಸಂತೋಷದ ವಿಚಾರ. ಆದರೆ ಅದಕ್ಕೆ ಒಂದು ಟೆಂಡರ್ ಕರೆಯುತ್ತಾರೆ, ಅಲ್ಲಿ ಟೆಂಡರ್ ಆಗಿ ಹಣ ನೀಡಲಾಗಿದೆ. ಹಾಗಾದರೆ ಆ ಸ್ವೆಟರ್ ಗಳು ಎಲ್ಲಿವೆ? ಯಾವ ಮಕ್ಕಳಿಗೆ ಸಿಕ್ಕಿವೆ? ಶಾಲೆ ಯಾವಾಗ ಆರಂಭವಾಗಿದೆ? ಎಂಬುದರ ಬಗ್ಗೆ ಪಾಲಿಕೆಯವರು ತಿಳಿಸಬೇಕು. ಈ ವಿಚಾರವಾಗಿ ಮುಖ್ಯಮಂತ್ರಿಗಳೇ ಜವಾಬ್ದಾರಿ ಹೊತ್ತು ಉತ್ತರ ನೀಡಬೇಕು ಎಂದರು.
ರಾಜ್ಯದ ಈ ಸರ್ಕಾರ ಆರೋಗ್ಯ ಕ್ಷೇತ್ರ, ಔಷಧ, ವೆಂಟಿಲೇಟರ್, ಆಂಬುಲೆನ್ಸ್ ವಿಚಾರವಾಗಿ ಹಗರಣ ಮಾಡುತ್ತಿದೆ ಎಂದು ನಾನು ಆಂಭದಿಂದಲೇ ಹೇಳುತ್ತಾ ಬಂದಿದ್ದೇನೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರುಪಾಯಿಗೆ ಖರೀದಿಸಿದ್ದನ್ನು, ರಾಜ್ಯ ಸರ್ಕಾರ 22 ಕೋಟಿ ರುಪಾಯಿಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಅವರು ದೂರಿದರು.
ಇನ್ನು ಯತ್ನಾಳ್ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿರುವ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಂಧನವಾದರೂ ಚಿಂತೆಯಿಲ್ಲ, ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಬೇರೆಯವರ ವಿರುದ್ಧವೂ ನಮ್ಮ ಕಾರ್ಯಕರ್ತರು ಹೋರಾಡುತ್ತಾರೆ ಎಂದು ತಿಳಿಸಿದರು.
ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿ ಗಣತಿ ವರದಿ ವಿಚಾರವಾಗಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ನಮ್ಮ ಸರ್ಕಾರವೇ 160 ಕೋಟಿ ರುಪಾಯಿ ವೆಚ್ಚ ಮಾಡಿ ಈ ಜಾತಿ ಗಣತಿ ನಡೆಸಿದ್ದು, ಈ ಮಾಹಿತಿ ವ್ಯರ್ಥವಾಗದೇ, ಇದು ಜನರಿಗೆ ಸಿಗುವಂತಾಗಬೇಕು ಎಂದರು.

