ಬೆಂಗಳೂರು: ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಡಿ.ಕೆ. ಶಿವಕುಮಾರ್ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯಿ, ‘ನನ್ನ ಬಗ್ಗೆ ಯಾರು, ಯಾವ ರೀತಿ ಮಾತಾಡಬೇಕೋ ಮಾತನಾಡಿದ್ದಾರೆ. ಅದನ್ನು ಯಾರು ಯಾವ ರೀತಿ ಬಳಸಿಕೊಳ್ಳಬೇಕೋ, ಬಳಸಿಕೊಂಡಿದ್ದಾರೆ. ನಾನು ಬಿಜೆಪಿ ಅವರನ್ನಾಗಲಿ, ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ ಎಂದರು.
ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಬಳಸಿಕೊಂಡಿದ್ದಾರೆ. ನಾನು ಯಾರನ್ನೂ ದೂಷಣೆ ಮಾಡುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದಾರೆಂದರು.
ಕಾಂಗ್ರೆಸ್ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಯಾರು ಏನು ಮಾತನಾಡುತ್ತಾರೋ ಮಾತಾಡಲಿ. ಕಳೆದ ಎರಡು ವರ್ಷಗಳಿಂದ ಯಾರು ಏನೆಲ್ಲಾ ಮಾತನಾಡಿದ್ದಾರೆ ಅದನ್ನೂ ನೋಡಲಿ. ಎಚ್. ವಿಶ್ವನಾಥ್, ಯೋಗೀಶ್ವರ್, ಮಂಚದ ಮೇಲೆ ರಮೇಶ್ ಜಾರಕಿಹೊಳಿ ಅವರು ಮಾತನಾಡಿದರಲ್ಲಾ.., ಅದಕ್ಕೆ ಉತ್ತರ ಯಾಕಿಲ್ಲ? ಯತ್ನಾಳ್ ಅವರ ಹೇಳಿಕೆಗೆ ಸಿ.ಟಿ ರವಿ ಅವರಾಗಲಿ, ಈಗ ಮಾತನಾಡುತ್ತಿರುವವರಾಗಲಿ ಯಾಕೆ ಉತ್ತರ ನೀಡಲಿಲ್ಲ. ಯಡಿಯೂರಪ್ಪ, ವಿಜಯೇಂದ್ರ ಕಲೆಕ್ಷನ್, ಅವರ ಮೊಮ್ಮಗನ ಬಗ್ಗೆ ಮಾತನಾಡಿದಾಗ ಇವರ ಧ್ವನಿ ಏನು ಬಿದ್ದು ಹೋಗಿತ್ತಾ? ಆಗ್ಯಾಕೆ ಮಾತನಾಡಲಿಲ್ಲ?’ ಎಂದರು ಡಿ.ಕೆ. ಶಿವಕುಮಾರ್.

