ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹುಗಳು ಚಾಚಿವೆ: ಹೆಚ್ ಡಿಕೆ ಆರೋಪ

ಸಿಂಧಗಿ: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಸಿಂಧಗಿ ಕ್ಷೇತ್ರದ ಉಪ ಚುಣಾವಣೆ ನಿಮಿತ್ತ ಪ್ರಚಾರ ಕೈಗೊಂಡಿರುವ ಅವರು ಕ್ಷೇತ್ರದ ಯಂಕಂಚಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧೀಗಳೊಂದಿಗೆ ಗುರುವಾರ ಮಾತನಾಡಿದರು.

ಈ ದಂಧೆಯ ಕಬಂಧಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೆÇೀಸ್ಟಿಂಗ್ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ಮಂತ್ಲಿ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಲಾಟರಿಗಳನ್ನು ನಿಷೇಧ ಮಾಡಿದ್ದೆ. ಇಂಥ ದಂಧೆಗಳಿಗೆ ಕಠಿಣವಾಗಿ ಕಡಿವಾಣ ಹಾಕಿದ್ದೆ. ಆದರೆ, ಈಗ ಅವೆಲ್ಲ ಬೇರೆ ಬೆರೆ ರೂಪಗಳಲ್ಲಿ ಅನಧಿಕೃತವಾಗಿ ಮತ್ತೆ ಕಾಣಿಸಿಕೊಂಡಿದ್ದು, ಪೆÇಲೀಸ್ ಇಲಾಖೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ದೊಡ್ಡ ಹಂತದಲ್ಲಿ ಇದರಲ್ಲಿ ಶಾಮೀಲಾಗಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ, ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಈ ದಂಧೆಗಳು ಸ್ವೇಚ್ಛಾಚಾರದಿಂದ ನಡೆಯುತ್ತಿವೆ. ಶ್ರಮಜೀವಿಗಳ ಹಣ ಹಾಳಾಗುತ್ತಿದೆ. ಸರಕಾರ ಅವುಗಳನ್ನು ಹತ್ತಿಕ್ಕುವ ಬದಲು ಸುಮ್ಮನಿದೆ ಎಂದು ಅವರು ಟೀಕಿಸಿದರು.

ಬಿಜೆಪಿಯವರೆಂದೂ ಕಾಮನ್‍ಮ್ಯಾನ್‍ಗಳಲ್ಲ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದೂ ಕಾಮನ್‍ಮ್ಯಾನ್ ಆಗಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮುಖ್ಯಮಂತ್ರಿಗಳು ಸಂಚಾರ ಮಾಡುವ ರಸ್ತೆಗಳಲ್ಲಿ ಹಂಪ್ಸ್ ಗಳನ್ನು ತೆಗೆಯಲಾಗಿದೆ, ರಾತ್ರಿ ಹೊತ್ತು ಅವರಿಗೆ ಎಸ್ಕಾರ್ಟ್ ಕೊಡಲಾಗುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು; ಈ ಬಗ್ಗೆ ನನಗೂ ಮಾಹಿತಿ ಬಂದಿದೆ ಎಂದರು.

ಬಿಜೆಪಿ ಅವರು ಹಿಂದೆ ಐದು ವರ್ಷ ಆಡಳಿತ ನಡೆಸಿದ್ದನ್ನು ನೋಡಿದ್ದೇವೆ. ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನ ಮಾಡಿ ಸರಕಾರ ಮಾಡಿ ಈಗ ಆಡಳಿತ ನಡೆಸುತ್ತಿರುವುದನ್ನು ನೋಡಿದ್ದೇವೆ. ಅವರೆಂದು ಜನಸಾಮಾನ್ಯರ ಪರ ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಸರ್ಟಿಫಿಕೇಟ್ ಕೊಡೋಕೆ ಸಿದ್ದರಾಮಯ್ಯ ಯಾರು?
ಜೆಡಿಎಸ್ ಸೆಕ್ಯೂಲರ್ ಪಕ್ಷ ಹೌದೋ ಅಲ್ಲವೋ ಎಂಬ ಬಗ್ಗೆ ಸರ್ಟಿಫಿಕೇಟ್ ಕೊಡಲು ಸಿದ್ದರಾಮಯ್ಯ ಯಾರು ಎಂದು ಮಾಜಿ ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಜೆಡಿಎಸ್ ಸೆಕ್ಯೂಲರ್ ಅಲ್ಲ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ನಮ್ಮದು ಎಲ್ಲರನ್ನೂ ಒಳಗೊಂಡ, ಎಲ್ಲರನ್ನೂ ಪ್ರತಿನಿಧಿಸುವ ಪಕ್ಷ. ಸಿದ್ದರಾಮಯ್ಯ ಅವರಿಂದ ನಾವು ಹಿತೋಪದೇಶ ಪಡೆಯುವ ಅಗತ್ಯವಿಲ್ಲ. ಸಿದ್ದರಾಮಯ್ಯ ಬಂದಿದ್ದು ಎಲ್ಲಿಂದ? ಇದೇ ಪಕ್ಷದಿಂದ. ಇವತ್ತು ಒಂಭತ್ತು ಜನ ಮೈನಾರಿಟಿ ನಾಯಕರಾಗಿ ಹೊರಹೊಮ್ಮಿದ್ದರೆ ಅದು ಪಕ್ಷ ಮತ್ತು ದೇವೇಗೌಡರ ಕೊಡುಗೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.