ಹುಬ್ಬಳ್ಳಿ: ಬಿಟ್ ಕಾಯಿನ್ ದಂಧೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಟ್ ಕಾಯಿನ್ ದಂಧೆಯಲ್ಲಿ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಅವರು, ರಾಜ್ಯ ಸರ್ಕಾರವು ಬಿಟ್ ಕಾಯಿನ್ ಮತ್ತು ಡ್ರಗ್ಸ್ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ. ತನಿಖೆ ಬಳಿಕ ನಾವೇ ಇಡಿ ಅಥವಾ ಸಿಬಿಐಗೆ ಪ್ರಕರಣವನ್ನು ವಹಿಸಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆ ಬಗ್ಗೆ ನಾಳೆ ನಿರ್ಧಾರ
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಶುಕ್ರವಾರ ಸಭೆ ಕರೆಯಲಾಗಿದ್ದು, ನಿರ್ಧಾರ ತಗೆದುಕೊಳ್ಳಲಾಗುವುದು. ಗೀತ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇಂಥ ಕಾರ್ಯಕ್ರಮಗಳು ಇನ್ನೂ ಹೆಚ್ಚೆಚ್ಚು ನಡೆಸುವಂತೆ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಎರಡೂ ಕ್ಷೇತ್ರಗಳಲ್ಲಿ ಗೆಲ್ಲೋದು ನಮ್ಮ ಅಭ್ಯರ್ಥಿಗಳೇ
ಚುನಾವಣಾ ಬಹಿರಂಗ ಪ್ರಚಾರ ಮುಗಿದಿರುವುದರಿಂದ ಹೆಚ್ಚಿಗೆ ಮಾತನಾಡಲಾರೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ಸಿಎಂ ಹೇಳಿದರು.

