ಮೈಸೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ತೆರಳಲು ಸಾಧ್ಯವಾಗಿಲ್ಲ, ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ರಾಜ್ಯ ದಲ್ಲಿ ಬಿಜೆಪಿ ಯತ್ತ ಒಲವಿದೆ ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯ ವಲ್ಲ ಎಂದು ತಿಳಿಸಿದರು.
ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದರು.
ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.ಸ್ಪರ್ಧೆ ತೀವ್ರವಾಗಿದ್ದು, ಮೊದಲ ಪ್ರಾಶಸ್ತ್ರ ಮತದಲ್ಲೇ ಬಿಜೆಪಿ ಗೆಲ್ಲಲ್ಲಿದೆ ಎಂದರು.
ಸಿದ್ದರಾಮಯ್ಯ ಜಿಟಿದೇವೇಗೌಡ ಒಂದಾಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಒಂದು ರೀತಿಯ ನಗೆ ಪಾಟಲು ಎಂದು ಹೇಳಿದರು.
ಅಧಿಕಾರಕ್ಕಾಗಿ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ನಾನೇ ಸಿಎಂ ಎನ್ನುತ್ತಿದ್ದಾರೆ. ಏನೋ ಚುನಾವಣೆಯಲ್ಲಿ ಗೆದ್ದು ಬಂದಿದ್ದೀರಾ. ಮೊದಲು ಅದನ್ನ ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ ಎಂದು ಶ್ರೀನಿವಾಸಪ್ರಸಾದ್ ಸಲಹೆ ನೀಡಿದರು.
ಆರ್ ಎಸ್ ಎಸ್ ನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆಗೆ ಮುಂದಾಗಿದೆಯಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಬಗ್ಗೆ ಟೀಕೆ ಮಾಡುವುದು ಸರಿ. ತಮ್ಮ ಟೀಕೆಗೆ ಆರ್ ಎಸ್ ಎಸ್ ಬಳಸಿ ಕೊಳ್ಳುವುದು ಸರಿಯಲ್ಲ
ಆರ್ ಎಸ್ ಎಸ್ ಒಂದು ರಾಜಕೀಯ ಪಕ್ಷವಲ್ಲ. ಹೀಗಾಗಿ ಅದರ ಮೇಲೆ ರಾಜಕೀಯವಾಗಿ ಟೀಕೆ ಸಲ್ಲದು ಎಂದರು.

